ಪ್ರಜಾಸ್ತ್ರ ಸುದ್ದಿ
ಸಿಂದಗಿ: ಕೋವಿಡ್ 19 ಹಾಗೂ ನೆರೆಯಿಂದಾಗಿ ಅಪಾರ ಹಾನಿಯಾಗಿದ್ದು ಸರ್ಕಾರ ನೈಸರ್ಗಿಕ ವಿಪತ್ತನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಜಿಲ್ಲೆ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ರು. ಪಟ್ಟಣದ ಶ್ರೀ ಸಾತವೀರೇಶ್ವರ ಸಭಾಭವನದಲ್ಲಿ ಬುಧವಾರ ಸಾರ್ವಜನಿಕ ಕುಂದುಕೊರತೆಗಳ ಸಭೆ ಉದ್ಘಾಟಿಸಿ ಅವರು ಮಾತ್ನಾಡಿದ್ರು.
ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿದ್ದು ಅವುಗಳನ್ನು ಸವಾಲಾಗಿ ಸ್ವೀಕರಿಸಿದ್ದು ಮಾತ್ರವಲ್ಲದೇ ಸಮರ್ಥವಾಗಿ ನಿಭಾಯಿಸಲಾಗುತ್ತೆ ಎಂದರು. ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ. ಅನೇಕ ಜನಪರ ಕಾರ್ಯಕ್ರಮ ಜಾರಿಗೊಳಿಸಿದ್ದು, ಅವುಗಳನ್ನ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಭೆ ಆಯೋಸಲಾಗ್ತಿದೆ ಎಂದರು.
ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾತ್ನಾಡಿ, ಪ್ರಾಕೃತಿಕ ವಿಕೋಪದಂತಹ ಸಂದರ್ಭದಲ್ಲಿ ಮನೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಪರಿಹಾರ ವಿತರಿಸಲಾಗಿದೆ. ಸುಮಾರು 4000 ಮನೆಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ ಎಂದರು.
ಆರೋಗ್ಯ ಇಲಾಖೆ, ಹಿರಿಯ ನಾಗರಿಕರ ಸಮಸ್ಯೆ ಬಗೆ ಹರಿಸಲು ಆದ್ಯತೆ ನೀಡಲಾಗುವುದು. ಹಿರಿಯ ನಾಗರಿಕರನ್ನು ಮಕ್ಕಳು ಚೆನ್ನಾಗಿ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಉಪ ವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳುವ ಅಧಿಕಾರ ಇದೆ. ತೋಟಗಾರಿಕೆ ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಬೀದಿ ದೀಪ, ರಸ್ತೆ ಹಾಗೂ ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಈ ವೇಳೆ ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಉಪ ವಿಭಾಗಾಧಿಕಾರಿ ರಾಹುಲ ಶಿಂಧೆ, ಎಎಸ್ ಪಿ ಡಾ.ರಾಮ ಅರಸಿದ್ದಿ, ಇಂಡಿ ಡಿವೈಎಸ್ಪಿ ಶ್ರೀಧರ ದಡ್ಡಿ, ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಹಾನಂದ ಸಾಲಕ್ಕಿ ಸೇರಿದಂತೆ ಇತರರು ಭಾಗವಹಿಸಿದ್ರು.