ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮೋದಿ ಅಧಿಕಾರಕ್ಕೆ ಬಂದ ಮೇಲೆ 20-25 ಶ್ರೀಮಂತರಿಗೆ ದೇಶದ ಸಂಪತ್ತು ಹಂಚಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಆ ಎಲ್ಲ ಶ್ರೀಮಂತರ ಸಂಪತ್ತು ಬಡವರಿಗೆ, ರೈತರಿಗೆ, ಮಹಿಳೆಯರಿಗೆ ಹಂಚಿಕೆ ಮಾಡುವ ಮೂಲಕ ಎಲ್ಲರ ಆರ್ಥಿಕ ಬದುಕು ಸುಧಾರಿಸಲಾಗುವುದು ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನಗರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಶೇ.70ರಷ್ಟು ಜನರ ಬಳಿ ಇರಬೇಕಾದ ಸಂಪತ್ತು ಕೇವಲ ಶೇ.1ರಷ್ಟು ಜನರ ಬಳಿಯಿದೆ. ಮೋದಿ ಆಡಳಿತದ ಅವಧಿಯಲ್ಲಿ ಅವರನ್ನು ಮತ್ತಷ್ಟು ಶ್ರೀಮಂತರನ್ನಾಗಿ ಮಾಡಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಂದರು ಸೇರಿದಂತೆ ಅನೇಕ ರಾಷ್ಟ್ರೀಯ ಸಂಪತ್ತುಗಳನ್ನು ಉದ್ಯಮಿಗಳಿಗೆ ಹಸ್ತಾಂತರಿಸಿದ್ದಾರೆ. ಇಂಡಿಯಾ ಮೈತ್ರಿಕೂಟ ಇದನ್ನು ಸರ್ಕಾರದಿಂದ ವಂಚಿತರಾದವರಿಗೆ ಹಂಚುತ್ತದೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂಪಾಯಿ, ಯುವಕರಿಗೆ ಉದ್ಯೋಗ, ರೈತರ ಸಾಲ ಮನ್ನಾ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲಾಗುವುದು ಎಂದರು. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ನಾಶ ಪಡಿಸಲು ಹೊರಟವರು ಹಾಗೂ ಅದನ್ನು ಉಳಿಸಲು ಹೊರಟವರ ನಡುವಿನ ಹೋರಾಟ. ಸಂವಿಧಾನ ಉಳಿಸುವವರನ್ನು ಆರಿಸಿ ತರಬೇಕು ಅಂತಾ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ್ ಸೇರಿ ಅನೇಕರು ಮಾತನಾಡಿದರು.