ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ಭೂಮಿ ಪೂಜೆ ನಡೆಯಲಿದೆ. ಇದಕ್ಕಾಗಿ ಎಲ್ಲೆಡೆ ಕುತೂಹಲ ಮೂಡಿದೆ. ಇದರ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಿತ್ರದುರ್ಗದಲ್ಲಿ ನಾಳೆ ಬೆಳಗ್ಗೆ 5ಗಂಟೆಯಿಂದ ರಾತ್ರಿ 12 ಗಂಟೆಯ ತನಕ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ ಎಂದು ಡಿಸಿ ಕವಿತಾ ಎಸ್ ಮನ್ನಿಕೇರಿ ಆದೇಶಿಸಿದ್ದಾರೆ.
ಇನ್ನು ಬೆಣ್ಣೆನಗರಿ ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಯೋಧ್ಯೆ ವಿಚಾರವನ್ನ ಸೂಕ್ಷ್ಮವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ. ಉಡುಪಿಯಲ್ಲಿ ಸಹ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ಡಿಸಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಮಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಮ ಎಲ್ಲರಿಗೂ ಸೇರಿದವನು ಎಂದ್ಮೇಲೆ ಮಂದಿರ ನಿರ್ಮಾಣದ ಭೂಮಿ ಪೂಜೆಗೆ ಸಂಬಂಧಿಸಿದಂತೆ ಅಶಾಂತಿ ಸೃಷ್ಟಿಸಬಾರದು ಎಂದು ಪ್ರೀತಿಯ ಮನವಿ ಮಾಡಿಕೊಳ್ಳಬೇಕಿತ್ತು. ನಿಷೇಧಾಜ್ಞೆಯು ಜನರಲ್ಲಿ ಮತ್ತಷ್ಟು ಧ್ವೇಷ, ಆಕ್ರೋಶಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಸಾರ್ವಜನಿಕರು ಹೇಳ್ತಿದ್ದು, ಇದು ಎಷ್ಟು ಸರಿ ಅನ್ನೋ ಪ್ರಶ್ನೆ ಮಾಡಿದ್ದಾರೆ.