ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರ ಆಡಿಯೋ ಎನ್ನಲಾಗ್ತಿರುವ ವಿಚಾರ ಸಾಕಷ್ಟು ಸದ್ದು ಮಾಡ್ತಿದೆ. ಸಿಎಂ ಹಾಗೂ ಹಿರಿಯ ಸಚಿವರ ಸ್ಥಾನ ಬದಲಾವಣೆ ಮಾಡಲಾಗಿದೆ ಅನ್ನೋ ಆಡಿಯೋ ಸದ್ದು ಮಾಡ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಯಾರೂ ಗೂಟ ಹೊಡೆದುಕೊಂಡು ಕೂರಲು ಸಾಧ್ಯವಿಲ್ಲವೆಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಾನು ಬಿಜೆಪಿ ಸಾಮಾನ್ಯ ಕಾರ್ಯಕರ್ತ. ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಸಚಿವನಾದೆ. ರಾಜೀನಾಮೆ ಕೇಳಿದ್ರು ಕೊಟ್ಟೆ. ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡೆ. ದೇವೇಗೌಡರ ವಿರುದ್ಧ ಸ್ಪರ್ಧಿಸಲು ಕೇಂದ್ರ ರೇಷ್ಮೆ ಮಂಡಳಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೆ. ಶಾಸಕ, ಸಚಿವ, ಮುಖ್ಯಮಂತ್ರಿ ಯಾವುದೇ ಇರಲಿ, ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲವೆಂದು ಗರಂ ಆಗಿ ಮಾತ್ನಾಡಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ ಮಾತ್ನಾಡಿದ್ದು, ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ. ಸಿನಿಮಾ ನಟರ ಧ್ವನಿ ಎಷ್ಟು ಜನ ಅನುಕರಣೆ ಮಾಡಿಲ್ಲ. ಇದು ಹಾಗೆ. ಇದರ ಬಗ್ಗೆ ತನಿಖೆ ನಡೆಸುವಂತೆ ಸಿಎಂಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.