ಪ್ರಜಾಸ್ತ್ರ ಸುದ್ದಿ
ರಾಮನಗರ: ಗೊಲ್ಲರದೊಡ್ಡಿಯಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನವೊಂದು ಐವರು ಮಕ್ಕಳ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮತ್ತೊಂದು ಮಗು ಮೃತಪಟ್ಟಿದ್ದು, ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಞಾನವಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇಂದು ಮುಂಜಾನೆ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಮೂಲಕ ವಾಹನ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜ್ಞಾನವಿ ಸಹೋದರಿ ಶಾಲಿನಿ ಆಪಘಾತ ನಡೆದಾಗ ಸ್ಥಳದಲ್ಲೇ ಮೃತಪಟ್ಟಿದ್ದಳು, ಇದರಿಂದಾಗಿ ರಾಜಣ್ಣ, ಶಾಂತಮ್ಮ ದಂಪತಿಯ ಇಬ್ಬರು ಪುತ್ರಿಯರು ಸಾವನ್ನಪ್ಪಿದ್ದು, ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.
ಆಗಸ್ಟ್ 9ರ ರಾತ್ರಿ ಐವರು ಮಕ್ಕಳು ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ಗೂಡ್ಸ್ ವಾಹನ ಮಕ್ಕಳ ಮೇಲೆ ಹರಿದಿದೆ. ಆಗ ರೋಹನ್, ಶಾಲಿನಿ ಮೃತಪಟ್ಟಿದ್ದರು. ಸುಚಿತ್, ಜ್ಞಾನವಿ ಹಾಗೂ ಇನ್ನೊಂದು ಮಗು ಚಿಕಿತ್ಸೆ ಪಡೆಯುತ್ತಿದ್ದರು. ಸುಚಿತ್ ವಾರದ ಹಿಂದೆ ಮೃತಪಟ್ಟರೆ ಜ್ಞಾನವಿ ಭಾನುವಾರ ರಾತ್ರಿ ಪಟ್ಟಿದ್ದಾಳೆ. ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.