ಪ್ರಜಾಸ್ತ್ರ ಸುದ್ದಿ
ಶಿಗ್ಗಾಂವಿ: ನಾಮಪತ್ರ ಸಲ್ಲಿಸಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇರಬೇಕಾದರೆ ಅಭ್ಯರ್ಥಿಗಳು ಬದಲಾವಣೆ ಮಾಡುವ ಕೆಲಸಗಳು ನಡೆಯುತ್ತಿರುವುದು ಸಾಕಷ್ಟು ಅಚ್ಚರಿ ಮೂಡಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಿದೆ.
ಮಹಮ್ಮದ್ ಯೂಸಫ್ ಸವಣೂರ ಬದಲು ಯಾಸೀರ್ ಖಾನ್ ಪಠಾಣಗೆ ಟಿಕೆಟ್ ಘೋಷಿಸಲಾಗಿದೆ. ಮಂಗಳವಾರ ಸಂಜೆ ಹುಬ್ಬಳ್ಳಿಯ ಅಂಜುಮಾನ್ ಸಂಸ್ಥೆ ಅಧ್ಯಕ್ಷ ಸವಣೂರಗೆ ಟಿಕೆಟ್ ಘೋಷಿಸಿದೆ. ಇದೀಗ ದಿಢೀರ್ ಎಂದು ಹಾನಗಲ್ಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ, ಉದ್ಯಮಿ ಪಠಾಣಗೆ ಟಿಕೆಟ್ ಘೋಷಿಸಲಾಗಿದೆ.
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಕಳೆದ 3 ಬಾರಿ ಬಸವರಾಜ್ ಬೊಮ್ಮಾಯಿ ಗೆಲುವು ಸಾಧಿಸುವ ಮೂಲಕ ಕಮಲ ಅರಳಿಸುತ್ತಿದ್ದಾರೆ. ಕಳೆದ ನಾಲ್ಕು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿಗೆ ಟಿಕೆಟ್ ನೀಡಬಾರದೆಂದು ಒತ್ತಡ ಕೇಳಿ ಬಂತು. ಹೀಗಾಗಿ ಸವಣೂರಗೆ ಟಿಕೆಟ್ ನೀಡಲಾಗಿತ್ತು. ಈಗ ನೋಡಿದರೆ ಅವರನ್ನು ಸಹ ಬದಲಾವಣೆ ಮಾಡಲಾಗಿದೆ.