ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ಅಮಾನವೀಯ ನಡೆಯಿಂದ ಬಾಣಂತಿ, ಎರಡು ಹಸುಗೂಸುಗಳು ಮೃತಪಟ್ಟ ಘಟನೆಯಿಂದಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಇನ್ನು ಮುಂದೆ ತುರ್ತು ವೇಳೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲೆ ಕೇಳುವಂತಿಲ್ಲವೆಂದು ಆದೇಶ ಹೊರಡಿಸಿದೆ.
ತುಮಕೂರಿನಲ್ಲಿ ನಡೆದ ಘಟನೆಯ ಆಧಾರದ ಮೇಲೆ ಈ ಕೆಳಕಂಡ ಅಂಶವನ್ನು ಆರೋಗ್ಯ ಇಲಾಖೆಯು ಮತ್ತೊಮ್ಮೆ ಪುನರುಚ್ಚರಿಸಿದೆ. ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ/ಜಾತಿ/ ವರ್ಗ/ ಆರ್ಥಿಕ ಸ್ಥಿತಿ ಯನ್ನು ಅವಲಂಭಿಸಬಾರದು. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದೆ.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒತ್ತಾಯಿಸಬಾರದೆಂದು ಎಂದಿದೆ. ಇಂತಹ ಘಟನೆಯು ಮುಂದಿನ ದಿನಗಳಲ್ಲಿ ಮರುಕಳಿಸಿದ್ದಲ್ಲಿ ಇಲಾಖೆಯು ಸಂಬಂದಪಟ್ಟ ಅಧಿಕಾರಿ/ನೌಕರರನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.