ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದ್ವಾಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದು, ತೀವ್ರ ವಿಚಾರಣ ನಡೆಸಿದ್ದಾರೆ.
ಜಾಹಿದ್, ಉಮರ್, ಜುನೈದ್, ಮುದಾಸಿರ್, ಸಯ್ಯದ್ ಸೋಹಲ್ ಅನ್ನೋ ಐವರನ್ನು ಬಂಧಿಸಲಾಗಿದೆ. ಬಂಧಿತರಿಂದ 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, 4 ಗ್ರೆನೈಡ್, 2 ಸ್ಯಾಟ್ ಲೈಟ್ ಫೋನ್, 4 ವಾಕಿಟಾಕಿ, 2 ಡ್ರ್ಯಾಗರ್ ಸೇರಿದಂತೆ ಸ್ಫೋಟಕ್ಕೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಇನ್ನಿಬ್ಬರ ಜೊತೆ ಸಂಪರ್ಕ ಇರುವ ಮಾಹಿತಿ ಲಭ್ಯವಾಗಿದ್ದು, ಅವರ ಕುರಿತು ತನಿಖೆ ನಡೆಯುತ್ತಿದೆ. ವಿದ್ವಾಂಸಕ ಕೃತ್ಯ ನಡೆಸಲು ಕಚ್ಚಾ ವಸ್ತುಗಳನ್ನು ಸಂಗ್ರಹಿಸಿದ್ದರು. ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಸಿಕ್ಕ ತಕ್ಷಣ ಎನ್ಐಎ, ಸಿಸಿಬಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರು ಮಾತನಾಡಿದ್ದು, ಶಂಕಿತ ಉಗ್ರರು ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಅವರ ಮನೆಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ. 2008ರ ಸರಣಿ ಬಾಂಬ್ ಸ್ಫೋಟದ ರೂವಾರಿ ಟಿ.ನಜೀರ್, 2017ರ ಪ್ರಕರಣದ ಆರೋಪಿ ಜುನೈದ್ ಇವರಿಗೆ ತರಬೇತಿ ನೀಡಿದ್ದಾರೆ ಅಂತಾ ತಿಳಿಸಿದ್ದಾರೆ. ಬಂಧಿತರನ್ನು 15 ದಿನ ಕಸ್ಟಡಿಗೆ ಪಡೆಯಲಾಗಿದೆ. ಏನೆಲ್ಲ ಪ್ಲಾನ್ ಮಾಡಿದ್ದರು ಅನ್ನೋ ವಿಚಾರಣೆ ನಡೆಯಲಿದೆ ಎಂದರು.