ಹುಬ್ಬಳ್ಳಿ: ಪಾಕಿಸ್ತಾನದ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರದ ಮೇಲೆ ದಾಳಿ ಮಾಡಬಹುದು ಎಂಬ ಗುಪ್ತಚರ ಮಾಹಿತಿ ಮೇರೆಗೆ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಇದರಿಂದಾಗಿ ನಗರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ರಿಂದ, ಪಾಕಿಸ್ತಾನದ ಉಗ್ರರು ಫೆಬ್ರುವರಿಯಲ್ಲಿ ಪುಲ್ವಾಮಾದಲ್ಲಿ ಮಾಡಿದ್ದ ಆತ್ಮಾಹುತಿ ದಾಳಿ ರೀತಿಯಲ್ಲೇ ಮತ್ತೆ ದಾಳಿ ಮಾಡುವ ಸಾಧ್ಯತೆಗಳಿವೆ. ಈಗಾಗಲೇ ರಾಜ್ಯಕ್ಕೂ ಕೆಲ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಜ್ಯದ ಬಹುತೇಕ ಪ್ರಮುಖ ನಗರ ಹಾಗೂ ಪ್ರಮುಖ ಕಟ್ಟಡ, ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಪೋಲಿಸರು ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನ ತಪಾಸಣೆ ನಡೆಸುತ್ತಿದ್ದಾರೆ. ಸಂಶಯಾಸ್ಪದ ರೀತಿಯಲ್ಲಿ ಕಂಡು ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.