ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಮುಂದಿನ ಲೋಕಸಭಾ ಚುನಾವಣೆ ಎದುರಿಸುವ ಲೆಕ್ಕಾಚಾರ ನಡೆದಿದೆ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ ಬೊಮ್ಮಾಯಿ, ನಮ್ಮಲ್ಲಿ ಪ್ರಾದೇಶಿಕ ಪಕ್ಷಗಳು ಜಾಸ್ತಿ ಇವೆ. ನಾಳೆ ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಏನೂ ಲಾಭವಿಲ್ಲ. ಜೆಡಿಎಸ್ ಜೊತೆ ಮೈತ್ರಿ ವಿಚಾರ ವರಿಷ್ಠರಿಗೆ ಬಿಟ್ಟಿದ್ದು ಎಂದರು.
ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮೋದಿಯವರನ್ನು ಸೋಲಿಸಬೇಕು ಅನ್ನೋ ಏಕೈಕ ಕಾರಣಕ್ಕೆ ಇವರೆಲ್ಲ ಒಂದಾಗುತ್ತಿದ್ದಾರೆ. ಅವರಿಗೆ ಸ್ವಂತ ಶಕ್ತಿ ಇಲ್ಲ. ಹೀಗಾಗಿ ಪ್ರತಿಪಕ್ಷಗಳ ಒಕ್ಕೂಟ ರಚನೆ, ಸಭೆ ಅನ್ನೋದಕ್ಕೆ ಯಾವುದೇ ರಾಜಕೀಯ ಅರ್ಥವಿಲ್ಲ ಅಂತಾ ಹೇಳುವ ಮೂಲಕ ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ ಬಗ್ಗೆ ಕುಟುಕಿದರು.