ಪ್ರಜಾಸ್ತ್ರ ಸುದ್ದಿ
ನವದೆಹಲಿ: ಬಿಜೆಪಿ ಸಂಸದ ಹಾಗೂ ಕುಸ್ತಿ ಫಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿದೆ. ಹೀಗಾಗಿ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.
ಫಡರೇಶನ್ ಅಧ್ಯಕ್ಷರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಬೇಕು ಎಂದು ಕಳೆದ 3 ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ಇದರಲ್ಲಿ ಕಾಮನ್ ವೆಲ್ತ್, ಏಷನ್ ಗೇಮ್ಸ್ ನಲ್ಲಿ ದೇಶಕ್ಕೆ ಪದಕಗಳ ಮೂಲಕ ಕೀರ್ತಿ ತಂದ ಖ್ಯಾತ ಕುಸ್ತಿಪಟುಗಳು ಭಾಗವಹಿಸಿದ್ದಾರೆ.
ಸಂಸದ ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಏಪ್ರಿಲ್ 28ರಂದು ಮುಂದಿನ ವಿಚಾರಣೆ ನಡೆಸಲಿದೆ. ಕೆಲ ದಿನಗಳ ಹಿಂದೆಯೇ ದೂರು ನೀಡಿದ್ದರು ಪೊಲೀಸರು ಎಫ್ಐಆರ್ ದಾಖಲಿಸುತ್ತಿಲ್ಲವೆಂದು ಕುಸ್ತಿಪಟುಗಳು ಹೇಳುತ್ತಿದ್ದಾರೆ.
ಈ ಹಿಂದೆಯೂ ಸಹ ಪ್ರತಿಭಟನೆ ನಡೆಸಿದ್ದರು. ಕ್ರೀಡಾ ಸಚಿವಾಲಯ ನೀಡಿದ ಭರವಸೆ ಮೇಲೆ ಪ್ರತಿಭಟನೆ ಕೈ ಬಿಟ್ಟಿದ್ದರು. ಆದರೆ, ಅವರು ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ ನಡೆಸಲಾಗುತ್ತಿದೆ.