ಪ್ರಜಾಸ್ತ್ರ ಸುದ್ದಿ
ಆಲಮೇಲ(Aalmela): ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಇಬ್ಬರು ಮಕ್ಕಳು ಸೇರಿ ದಂಪತಿ ಸಾವನ್ನಪ್ಪಿದ್ದಾರೆ. ಗುರುನಾಥ ಬಡಿಗೇರ(36), ಪತ್ನಿ ಜ್ಯೋತಿ(28), ಮಕ್ಕಳಾದ ಕೀರ್ತಿ(6), ಕಾಳಮ್ಮ(12) ಮೃತ ದುರ್ದೈವಿಗಳು.
ಗುರನಾಥ ತಾಯಿ ಶಾಂತಾಬಾಯಿ ಹಾಗೂ ಮಗ ವೀರೇಶ(10) ಮತ್ತೊಂದು ಮನೆಯಲ್ಲಿ ಮಲಗಿದ್ದರು. ಹೀಗಾಗಿ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.. ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ, ಈ ಘಟನೆ ನಡೆಯಬಾರದಿತ್ತು. ಇದು ಬೇಸರ ತಂದಿದೆ. ಮೃತರ ಕುಟುಂಬಸ್ಥರಕ್ಕೆ ತಲಾ 5 ಲಕ್ಷದಂತೆ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಬಾಲಕ ವೀರೇಶ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಠೇವಣಿ ಇಡಲಾಗುವುದು ಹಾಗೂ ಓದಿಗೆ ನೆರವು ನೀಡಲಾಗುವುದು ಎಂದರು. ಇದೇ ವೇಳೆ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದರು.



