ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ(Thiruvananthapuram): ಕೇರಳಂನ ಮಜ್ಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎಲ್ಲರ ಗಮನ ಸೆಳೆದರು. ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಮಜ್ಜೇಶ್ವರ ಕೇರಳಂ ರಾಜ್ಯದ ಪಾಲಾಗಿದೆ. ಆದರೆ, ಇಂದಿಗೂ ಈ ಪ್ರದೇಶದ ಜನರು ಕನ್ನಡ ತಮ್ಮ ಮಾತೃಭಾಷೆ ಎನ್ನುತ್ತಾರೆ. ಅಂತಹ ಜನರ ಪ್ರತಿನಿಧಿಯಾಗಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಎ.ಕೆ.ಎಂ ಅಶ್ರಫ್ ಕಳೆದ ಬಾರಿಯಂತೆ ಈ ಬಾರಿಯೂ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.
ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆ ಎಂದು, ಭಾರತದ ಸೌರ್ವಭೌಮತ್ವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆ ಎಂದು, ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ಸೃಷ್ಟಿಕರ್ತನಾದವನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಮಾಣ ವಚನ ಕುರಿತವಾಗಿ ಫೇಸ್ ಬುಕ್ ನಲ್ಲಿ ಮಾತನಾಡಿದಾಗಲೂ ಕನ್ನಡದಲ್ಲಿಯೇ ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿ ಮಾತನಾಡಿದ್ದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದಿಂದ ಮಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.



