ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಿರಿಯ ಸಾಹಿತಿಗಳಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಪ್ರೊ.ಜಿ.ಎಸ್ ಸಿದ್ದರಾಮಯ್ಯ ಹಾಗೂ ಡಾ.ಸರಜೂ ಕಾಟ್ಕರ್ ಅವರಿಗೆ ಪ್ರತಿಷ್ಠಿತ ನೃಪತುಂಗ ಪ್ರಶಸ್ತಿ ಲಭಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಹಾಗೂ ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. 2023, 2024 ಹಾಗೂ 2025ನೇ ಸಾಲಿನ ಪ್ರಶಸ್ತಿ ಈ ಮೂವರು ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಲಾಗಿದೆ.
ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ.ದಯಾನಂದ ನೇತೃತ್ವದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಒಂದೂವರೆ ಕೋಟಿ ರೂಪಾಯಿಗಳ ದತ್ತಿನಿಧಿಯನ್ನು ಸ್ಥಾಪಿಸಿದೆ. ಅದರಿಂದ ಬರುವ ಬಡ್ಡಿ ಹಣದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ ಲೇಖಕರಿಗೆ ನೃಪತುಂಗ ಪ್ರಶಸ್ತಿ ನೀಡಲಾಗುತ್ತಿದೆ. ತಲಾ 7 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.



