ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಸಿಂದಗಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ಭೀಮ್ ಸೇನೆ ವತಿಯಿಂದ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಅವರ ಹಕ್ಕನ್ನು ಅವರು ಪ್ರಶ್ನಿಸಿದರೆ ಲಾಠಿ ಚಾರ್ಜ್ ಮಾಡುತ್ತಿರುವುದು ಖಂಡನೀಯ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು.
ಈ ವೇಳೆ ಸಚಿನ್ ಚೌರ, ಪ್ರಕಾಶ ಹೊಸಮನಿ ರಮೇಶ ನಡುವಿನಕೇರಿ ಮಾತನಾಡಿ, ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ನೀಟ್ ಪರೀಕ್ಷೆ ಅಕ್ರಮದಿಂದ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದರು. ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ್ ಇಂದಿರಾಬಾಯಿ ಬಳಗಾನೂರ ಅವರು ಮನವಿ ಪತ್ರ ಸ್ವೀಕರಿಸಿದರು. ಪ್ರವೀಣ ದೊಡಮನಿ, ಪ್ರದೀಪ ಅಜ್ಜನವರ, ಬಸು ಚೌರ, ಆದಿತ್ಯ ಬಿಸನಾಳ, ಅಭಿ ಚೌರ, ದತ್ತು ನಾಲಕಮಾನ, ಸಂತೋಷ ಸೋಂಪುರ, ನವೀನ ಒಗ್ಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.



