ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಜೆಪಿ ಸಿಂದಗಿ ಮಂಡಲ ವತಿಯಿಂದ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ 4ನೇ ದಿನವಾದ ಶುಕ್ರವಾರ ಅಂತ್ಯಗೊಳಿಸಿದೆ. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ. ಈ ವೇಳೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ತಾನು ಎಸ್ ಟಿ ಅನ್ನೋ ಕಾರಣಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳುವ ನಾಗೇಂದ್ರನಿಗೆ ಅದೆ ಸಮುದಾಯದ ಅನುದಾನ ದುರ್ಬಳಕೆ ಮಾಡಿಕೊಳ್ಳುವಾಗ ಕಾಳಜಿ ಇರಲಿಲ್ಲವೇ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು. ವಿಧಾನ ಮಂಡಲದಲ್ಲಿ ಬರ ಪರಿಸ್ಥಿತಿ ಕುರಿತು ಚರ್ಚೆಯಾಗದ ಕಾರಣ ಪ್ರತಿಭಟನೆ ಕೈಬಿಟ್ಟು ಬರ ಪರಿಸ್ಥಿತಿ ಕುರಿತು ಚರ್ಚಿಸಲು ರಾಜ್ಯ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಹೋರಾಟ ಕೈ ಬಿಡಲಾಗಿದೆ ಎಂದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ನಾಗೇಂದ್ರ ಅವರು ಸಂವಿಧಾನದ ಮೌಲ್ಯಗಳಿಗೆ ಅಪಚಾರ ಎಸಗಿದ್ದಾರೆ. ಹಗರಣದಲ್ಲಿ ಆಗಿನ ಸಚಿವ ನಾಗೇಂದ್ರ ಮೌಖಿಕ ಸೂಚನೆ ಬಹುದೊಡ್ಡ ಪಾತ್ರ ವಹಿಸಿದೆ. ಮುಖ್ಯಮಂತ್ರಿಗಳು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಮಳೆ ಕೊರೆತೆಯಿಂದ ವಿಜಯಪುರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಹಿನ್ನಡೆಯಾಗಿದೆ. ಕುಡಿಯುವ ನೀರಿ, ಜಾನುವಾರುಗಳಿಗೆ ಮೇವು ಸಮಸ್ಯೆಯಾಗಿದೆ. ಕೂಡಲೇ ವಿಜಯಪುರವನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದರು.
ಈ ವೇಳೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಉಮೇಶ ಕಾರಜೋಳ, ಶ್ರೀಶೈಲಗೌಡ ಬಿರಾದಾರ, ಅಶೋಕ ಅಲ್ಲಾಪೂರ, ಶಂಕರ ಬಗಲಿ, ಸಂಗನಗೌಡ ಪಾಟೀಲ, ವಿವೇಕಾನಂದ ಡಬ್ಬಿ, ಸಂಜೀವ ಐಹೊಳ್ಳಿ, ಗೋಪಾಲ ಘಟಕಾಂಬಳೆ, ಈರಣ್ಣ ರಾವೂರ, ಸಾಬು ಮಾಶ್ಯಾಳ, ನಾಗಪ್ಪ ಶಿವೂರ, ವಿಜಯ ಜೋಶಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರಿಗೆ ಮನವಿ ಸಲ್ಲಿಸಿದರು.



