ಪ್ರಜಾಸ್ತ್ರ ಸುದ್ದಿ:
ವಿಜಯಪುರ(Vijayapura): ಜಿಲ್ಲೆಯಲ್ಲಿ ಮಳೆ ಅಭಾವದಿಂದ ತೀವ್ರ ಬರಪರಿಸ್ಥಿತಿ ನಿರ್ಮಾಣವಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣವೇ ‘ಬರಪೀಡಿತ ತಾಲೂಕುಗಳು’ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಮೆರವಣಿಗೆ ಮೂಲಕ ರೈತ ಮುಖಂಡರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಧರಣಿಗೆ ಬೆಂಬಲ ಸೂಚಿಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಯಂಡಿಗೇರಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿದ್ದು, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಯಾವುದೇ ವಿಳಂಬವಿಲ್ಲದೆ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಬಿ.ಜಿ.ಪಾಟೀಲ, ಮುಖಂಡರಾದ ಸೋಮವಾರ ಪಾಟೀಲ, ಪಂಚಪ್ಪ ಕಲಬುರ್ಗಿ, ಖಾದ್ರಿ ಇನಾಂದಾರ್, ರಾಜು ಹಿಪ್ಪರಗಿ, ಅಪ್ಸರಾ ಬೇಗಂ ಚಪ್ಪರಬಂದ, ಮಾದೇವಿ ಪಾಟೀಲ, ಶಾಂತಾ ಲಮಾಣಿ, ಗುರುನಗೌಡ ಪಾಟೀಲ, ಭಾಗಾಯತ್ ರಾಜು ಹಿರೇಮಠ, ಶಂಕರ್ ಹಾಲಹಳ್ಳಿ, ಮಲ್ಲು ತೊರವಿ, ಮುತ್ತು ಜಂಗಮಶೆಟ್ಟಿ, ಶರಣಗೌಡ ಪಾಟೀಲ, ಬಸವರಾಜ ಹೊನವಾಡ, ಪ್ರಶಾಂತ ಕಿಣಗಿ, ಪೀರ್ ಗಚ್ಚಿನಮಲ್, ಎಂ.ಎನ್ ಪಾಟೀಲ, ಹುಸೇನ್ ಬಾಗಾಯತ್, ರೇವಣಸಿದ್ಧ ಕುಮಟೆ, ಶಿವಾಜಿ ಸಿಂಗಾಡಿ, ಸೇರಿದಂತೆ ಜೆಡಿಎಸ್ ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



